
ತುಮಕೂರು : ಪರಿಶಿಷ್ಟ ಜಾತಿ/ ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಆಧಾರ್ ಸೀಡಿಂಗ್ ಮಾಡದೆ ಪಾವತಿಸುವಲ್ಲಿ ವಿಳಂಬ ಮಾಡಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ. ಆಡಳಿತಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳು ಮೈ ಬಗ್ಗೆ ಕೆಲಸ ಮಾಡಬೇಕು ಎಂದು ಚಾಟಿ ಬೀಸಿದ ಘಟನೆ ಜಿಲ್ಲಾ ಪಂಚಾಯ್ತಿಯಲ್ಲಿ ನಡೆಯಿತು.
ಜಿಲ್ಲಾ ಪಂಚಾಯ್ತಿಯಲ್ಲಿ ಶುಕ್ರವಾರ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಶಾಲಾ ಶಿಕ್ಷಣ ಇಲಾಖೆಯು ಪರಿಶಿಷ್ಟ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಅವರು, ತೀರ್ವ ಅಸಮಾಧಾನ ವ್ಯಕ್ತಪಡಿಸಿದರು.
ಆಧಾರ ಸೀಡಿಂಗ್ ಯಾಕೆ ವಿಳಂಭವಾಯಿತು, ನಿಮ್ಮ ನಿರ್ಲಕ್ಷ್ಯಕ್ಕೆ ಏನು ಹೇಳಬೇಕು ಎಂದ ಅವರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಕೆಲಸ ಮಾಡಿದರೆ ವಾರದಲ್ಲಿ ಪೂರ್ಣಗೊಳ್ಳುತ್ತದೆ. ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು. ವಿದ್ಯಾರ್ಥಿಗಳ ಶಿಷ್ಯವೇತನ ವಿಷಯದಲ್ಲಿ ಇಂಥಹ ಉದಾಸೀನತೆ ಸರಿಯಲ್ಲ,ಈ ತಿಂಗಳಂತ್ಯದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಶಿಕ್ಣಣ ಇಲಾಖೆಗೆ ಬಿಡುಗಡೆಯಾದ ಅನುದಾನಗಳು ವೆಚ್ಚವಾಗದಿರುವುದನ್ನು ಗಮನಿಸಿದ ಅವರು, ಕ್ರಿಯಾ ಯೋಜನೆ ಮಾಡದೆ, ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲ. ಹಾಗಾಗಿ ಅನುದಾನ ವೆಚ್ಚವಾಗದೆ ಉಳಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸರಿಯಾದ ಮಾಹಿತಿಯನ್ನೂ ಇಟ್ಟುಕೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆಧೋರಬಹುದು. ಗ್ರಾಮೀಣ ಕುಡಿಯುವ ನೀರುವಸರಬರಾಜು ಇಲಾಖೆ ಈ ಬಗ್ಗೆ ಗಮನ ಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಮುನ್ನ ರಸ ಗೊಬ್ಬರ ಹಾಗೂ ಬಿತ್ತನೆ ಬೀಜ ಕಾಯ್ದಿರಿಸಿಕೊಳ್ಳಬೇಕು ಎಂದ ಅವರು, ರೈತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ತುಮಕೂರು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಿರಂತರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ರೇಷ್ಮೆ ಇಲಾಖೆ, ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ ಉಪಸ್ಥಿತರಿದ್ದರು.



