ಸ್ಮಾರ್ಟ್ಸಿಟಿಯಲ್ಲಿ ಗುಣಮಟ್ಟದ ಕಾಮಗಾರಿ : ಡಾ.ಅಮಿತಾ ಪ್ರಸಾದ್ ಮೆಚ್ಚುಗೆ

ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ನಡೆಯುತ್ತಿವೆ ಎಂದು ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಅಮಿತಾ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಮಹಾನಗರಪಾಲಿಕೆ ಆವರಣದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ನಿಂದ ಸಾರ್ವಜನಿಕರಿಗೆ ಆಗುವ ಉಪಯೋಗ ಮತ್ತು ಬಳಕೆ ಬಗ್ಗೆ ತಿಳಿಸಿಕೊಡುವ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಉತ್ತಮ ರಸ್ತೆಗಳು, sಕ್ರೀಡಾಂಗಣ, ಡಿಜಿಟಲ್ ಲೈಬ್ರರಿ, ಸಂಚಾರಿ ನಿಯಂತ್ರಣದ ಸಿಗ್ನಲ್ಗಳು ಹೀಗೆ ಹತ್ತು ಹಲವು ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿವೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಸ್ಮಾರ್ಟ್ ಹೆಲ್ತ್ಕಾರ್ಡ್ ಯೋಜನೆಯೂ ಉತ್ತಮವಾಗಿದೆ. ಇಡೀ ರಾಜ್ಯದಲ್ಲಿ ಇದು ಹೆಚ್ಚು ಪ್ರಚಾರವಾಗಬೇಕು, ಈ ಬಗ್ಗೆ ರಾಜ್ಯಸರ್ಕಾರದ ಜೊತೆ ಚರ್ಚಿಸುವುದಾಗಿ ತಿಳಿಸಿದ ಅವರು, ಆರೋಗ್ಯ ಇಲಾಖೆಯೂ ಹೆಚ್ಚು ಪ್ರಚಾರಪಡಿಸುವಂತೆ ಸೂಚಿಸುವುದಾಗಿ ತಿಳಿಸಿದರು.
ಸ್ಮಾರ್ಟ್ಹೆಲ್ತ್ ಕಾರ್ಡ್ಗಳನ್ನು ಸ್ಮಾರ್ಟ್ಸಿಟಿ ಸಾಫ್ಟ್ವೇರ್ ಮೂಲಕ ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳಲ್ಲೂ ಸಹ ಯಾವ ರೀತಿ ನೀಡಬೇಕೆಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಐಟಿ ಸ್ಮಾರ್ಟ್ಸಿಟಿ ಎಂದರೆ ಉತ್ತಮ ರಸ್ತೆಗಳಿರಬೇಕು, ಉತ್ತಮ ರಸ್ತೆಗಳಿದ್ದರೆ ಬಂಡವಾಳ ಹೂಡಲು ಅನೇಕರು ಇಲ್ಲಿಗೆ ಆಗಮಿಸುತ್ತಾರೆ. ಇದರಿಂದ ನಗರವೂ ಅಭಿವೃದ್ಧಿಯತ್ತ ಸಾಗುತ್ತದೆ. ಇಲ್ಲಿ ನಡೆಯುತ್ತಿರುವ ಸ್ಮಾರ್ಟ್ಕಾಮಗಾರಿಗಳ ನಿರ್ವಹಣೆಯನ್ನು ಸ್ಮಾರ್ಟ್ಸಿಟಿ ಯೋಜನಾಧಿಕಾರಿ ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದರು.
ನಗರದಲ್ಲಿ ನಿರ್ಮಾಣವಾಗುತ್ತಿರುವ ಸ್ಟೇಡಿಯಂ ಕಾಮಗಾರಿಯೂ ಸಹ ಉತ್ತಮ ಗುಣಮಟ್ಟದಿಂದ ಕೂಡಿದೆ. ಎಂಪ್ರೆಸ್ ಸರ್ಕಾರಿ ಕಾಲೇಜಿನ ಆವರಣದಲ್ಲಿ ನಿರ್ಮಾಣವಾಗಿರುವ ಡಿಜಿಟಲ್ ಲೈಬ್ರರಿಯೂ ಸಹ ಉತ್ತಮವಾಗಿದೆ. ಸಾರ್ವಜನಿಕರು ಸ್ಟೇಡಿಯಂ ಮತ್ತು ಲೈಬ್ರರಿಯ ಸದುಪಯೋಗಪಡಿಸಿಕೊಳ್ಳಬೇಕು, ಈ ಬಗ್ಗೆ ಸ್ಮಾರ್ಟ್ಸಿಟಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಕೋವಿಡ್ ಹಿನ್ನಲೆಯಲ್ಲಿ ಕಳೆದ ವರ್ಷದಿಂದ ಸ್ಮಾರ್ಟ್ಸಿಟಿ ಯೋಜನೆಯ ಕಾಮಗಾರಿಗಳು ಕುಂಠಿತಗೊAಡಿದ್ದವು, ಈಗ ಕಾಮಗಾರಿಗಳ ವೇಗ ಹೆಚ್ಚಿದ್ದು, ಶೀಘ್ರವಾಗಿ ಎಲ್ಲಾ ಕಾಮಗಾರಿಗಳನ್ನು ಮುಗಿಸಿ, ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಡಾ.ಅಮಿತಾ ಪ್ರಸಾದ್ ಸೂಚಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಮಾರಿಯಮ್ಮನಗರದಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಚಯವನ್ನು ಪರಿಶೀಲಿಸಿ ಅಶೋಕ ರಸ್ತೆಯಲ್ಲಿರುವ ಎಂಪ್ರೆಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಾಣವಾಗಿರುವ ಡಿಜಿಟಲ್ ಲೈಬ್ರರಿಯ ಕಟ್ಟಡವನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ ಎಂದರು.
ಸ್ಮಾರ್ಟ್ಸಿಟಿ ಯೋಜನೆಗೆ ಸಂಬಂಧಪಟ್ಟ ಕೆಲವು ಕಾಮಗಾರಿಗಳು ಕೋವಿಡ್ ಹಿನ್ನಲೆಯಲ್ಲಿ ಕೆಲಸಗಾರರ ಸಮಸ್ಯೆಯಿಂದ ವಿಳಂಬವಾಗಿದ್ದವು, ಅವೂ ಸಹ ಈಗ ಪ್ರಗತಿಯ ಹಂತದಲ್ಲಿವೆ. ಎಲ್ಲವೂ ಸಹ ಇನ್ನು ಕೆಲವೇ ತಿಂಗಳುಗಳಲ್ಲಿ ಮುಗಿಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಲಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ, ಮಹಾನಗರಪಾಲಿಕೆ ಸದಸ್ಯೆ ಗಿರಿಜಾ ಧನಿಯಾಕುಮಾರ್ ಸೇರಿದಂತೆ ಇತರೆ ಅಧಿಕಾರಿ ವರ್ಗ ಹಾಜರಿದ್ದರು.