ಕೋರೋನ ಮೂರನೇ ಅಲೆ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ
ಶಾಲಾ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯ

ತುಮಕೂರು: ಕೋರೋನ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಶಾಲಾ ಕಾಲೇಜುಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾರ್ತಿಕ ಮಾಸದ ಕಡೆ ಸೋಮವಾರದ ಅಂಗವಾಗಿ ವೀರಶೈವ ಲಿಂಗಾಯತ ಯುವ ವೇದಿಕೆ ಹಮ್ಮಿಕೊಂಡಿದ್ದ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿರುವ ಹಿನ್ನೆಲೆ ಎಲ್ಲಿ ಪ್ರಕರಣಗಳು ಕಂಡು ಬಂದರೂ,ಕ್ಲಸ್ಟರ್ ವಲಯವೆಂದು ಘೋಷಿಸಿ ಸೋಂಕು ಹರಡದಂತೆ ಕ್ರಮವಹಿಸಲಾಗಿದ್ದು, ವಿದೇಶ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದ್ದು, ಗಡಿ ಭಾಗದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಒಮ್ರಿಕಾನ್ ಸೋಂಕಿನ ಹಿನ್ನೆಲೆಯಲ್ಲಿ ಸೋಂಕಿತರ ಗಂಟಲು ದ್ರವ ಮಾದರಿಯನ್ನು ಹೆಚ್ಚಿನ ಪ್ರಯೋಗಕ್ಕೆ ಒಳಪಡಿಸುತ್ತಿದ್ದು, ವೈರಾಣು ಹೊಸ ರೂಪಾಂತರಿ ಒಮ್ರಿಕಾನ್ ಅಥವಾ ಡೆಲ್ಟಾ ಪ್ಲಸ್ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪರಿಹಾರಕ್ಕೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ 685 ಕೋಟಿ ಅನುದಾನವಿದ್ದು, ಅನುದಾನ ಬಳಸಿಕೊಳ್ಳಲು ಸೂಚನೆ ನೀಡಲಾಗಿದ್ದಯ, ಕೇಂದ್ರ ಸರಕಾರಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಕೇಂದ್ರ ತಂಡ ಬಂದು ಸಮೀಕ್ಷೆ ನಡೆಸಿದ ನಂತರ ಹೆಚ್ಚಿನ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈಗಾಗಲೇ ಕೆಲವೆಡೆ ಬೆಳೆ ಪರಿಹಾರವನ್ನು ವಿತರಿಸಲಾಗುತ್ತಿದ್ದು, ಪರಿಹಾರ ಅಪ್ನಲ್ಲಿ ಬೆಳೆ ಹಾನಿ ವಿವರಗಳನ್ನು ದಾಖಲಿಸುವ ಮೂಲಕ ಪರಿಹಾರ ವಿತರಿಸಬಹುದಾಗಿದ್ದು,ಕೇಂದ್ರ ತಂಡ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ ಬಳಿಕ ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆಯಬಹುದಾಗಿದ್ದು, ಹೆಕ್ಟೇರ್ ಗೆ ಹೆಚ್ಚಿನ ಪರಿಹಾರ ಬೇಡಿಕೆ ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ಈ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.
ನಡೆದಾಡುವ ದೇವರು ಡಾ.ಶ್ರೀಶಿವಕುಮಾರ ಸ್ವಾಮೀಜಿಗಳ ಜನ್ಮದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ಸರಕಾರ ತೀರ್ಮಾನ ಕೈಗೊಂಡಿದ್ದು,ಸಿದ್ಧಲಿಂಗ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ದಾಸೋಹ ದಿನದ ರೂಪುರೇಶೆ ರೂಪಿಸಲಾಗು ವುದು.ಶಿವಕುಮಾರಶ್ರೀಗಳು ಬದುಕಿದ್ದ ಕಾಲಘಟ್ಟದಲ್ಲಿ ಬದುಕಿದ್ದ ನಾವುಗಳೇ ಧನ್ಯರು,ಅವರ ನೆನಪಿನಲ್ಲಿ ನಡೆಯುತ್ತಿರುವ ಲಕ್ಷ ಬಿಲ್ವಾರ್ಚನೆಯಲ್ಲಿ ಪಾಲ್ಗೊಂಡಿದ್ದರುವುದು ನನ್ನ ಪುಣ್ಯ ಎಂದು ಸ್ಮರಿಸಿದರು.
ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ದಂಪತಿ ಸಮೇತ ಪೂಜೆ ಸಲ್ಲಿಸಿದ ನಂತರ ಸಿದ್ಧಲಿಂಗಸ್ವಾಮೀಜಿಗಳ ಆರ್ಶೀವಾದ ಪಡೆದು ಮಾತುಕತೆ ನಡೆಸಿದರು,ಈ ವೇಳೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,ಶಾಸಕ ಜ್ಯೋತಿಗಣೇಶ್,ಮಾಜಿ ಸಚಿವ ಸೊಗಡು ಶಿವಣ್ಣ,ವೀರಶೈವ ಲಿಂಗಾಯತ ಯುವ ವೇದಿಕೆಯ ಪ್ರಶಾಂತ್ ಕಲ್ಲೂರು,ಅರಕೆರೆ ರುದ್ರೇಶ್,ಚೆಂಗಾವಿ ರವಿ,ದೀಪಕ್, ಸೇರಿದಂತೆ ವಿವಿಧ ಮಠಗಳ ಮಠಾಧಿಪತಿಗಳು ಉಪಸ್ಥಿತರಿದ್ದರು.