ತುಮಕೂರು

ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸಂಸದ ಎ.ನಾರಾಯಣಸ್ವಾಮಿ ಸೂಚನೆ

ತುಮಕೂರು : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ನಿವೇಶನ ರಹಿತ ಬಡವರಿಗೆ ವಿವಿಧ ವಸತಿ ಯೋಜನೆಗಳಡಿ ನಿವೇಶನವನ್ನು ಒದಗಿಸದಿದ್ದಲ್ಲಿ ಅಂತಹ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರಿಗೆ ಸೂಚನೆ ನೀಡಿದರು.
ಶನಿವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಸಂಬಂಧ ಜರುಗಿದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆವಾಜ್ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ರಹಿತರ ಪಟ್ಟಿ ಮಾಡಿ ಅರ್ಹರಿಗೆ ಕೂಡಲೇ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಮಹಾನಗರಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಧಾನ ಮಂತ್ರಿ ಆವಾಜ್  ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ 5710 ಫಲಾನುಭವಿಗಳಿಂದ ಬೇಡಿಕೆಗಳಿದ್ದು, ಈ ಪೈಕಿ 4479 ಮನೆಗಳಿಗೆ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ಅನುಮೋದನೆಗೊಂಡ ವಸತಿ ನಿರ್ಮಾಣ ಕಾಮಗಾರಿಗಳ ಪೈಕಿ 1544 ಮನೆಗಳು ಪೂರ್ಣಗೊಂಡಿವೆ. ಉಳಿದಂತೆ 485 ತಳಪಾಯ, 315 ಛಾವಣಿ, 476 ಮೇಲ್ಛಾವಣಿ ಹಂತದಲ್ಲಿದ್ದು, 1258 ಮನೆಗಳು ಈವರೆಗೂ ಪ್ರಾರಂಭಗೊಂಡಿಲ್ಲ. ಅದೇ ರೀತಿ ಗ್ರಾಮೀಣ ಪ್ರದೇಶಗಳಲ್ಲಿ 2016 ರಿಂದ 2020ರವರೆಗೆ 8948 ಫಲಾನುಭವಿಗಳು ವಸತಿ ಸೌಲಭ್ಯಕ್ಕಾಗಿ ಆಯ್ಕೆಯಾಗಿದ್ದಾರೆ. ನಿಗಧಿತ ಗುರಿ 9550ರಲ್ಲಿ 5436 ವಸತಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿವೆ. ಉಳಿದಂತೆ 884 ತಳಪಾಯ, 293 ಲಿಂಟಲ್ ಮಟ್ಟ, 419 ಮೇಲ್ಛಾವಣಿ ಹಂತದಲ್ಲಿದ್ದು, 564 ನಿರ್ಮಾಣ ಕಾಮಗಾರಿಗಳು ಬಾಕಿ ಇರುತ್ತವೆ ಎಂದು ತಿಳಿಸಿದರು.
ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ವಿದ್ಯಾವಂತ ಯುವಕ ಯುವತಿಯರಿಗೆ ಒಲವು ಮೂಡಿಸುವುದರ ಜೊತೆಗೆ ಕೌಶಲ್ಯ ತರಬೇತಿ ನೀಡಿ ಸ್ವಯಂ ಉದ್ಯೋಗಿಗಳನ್ನಾಗಿಸಬೇಕು. ಈಗಾಗಲೇ ಕೃಷಿಯಲ್ಲಿ ಆಸಕ್ತಿ ಹೊಂದಿ ಸ್ವಯಂ ಉದ್ಯೋಗ ಮಾಡ ಬಯಸುವವರಿಗೆ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು.
ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಜಿಲ್ಲೆಯಲ್ಲಿ ತೆಂಗು ಬೆಳೆ ಆಯ್ಕೆಯಾಗಿದ್ದು, ತೆಂಗಿನ ಉತ್ಪನ್ನಗಳಿಗೆ ಸಂಬAಧಿಸಿದ ಕಿರು ಉದ್ದಿಮೆಗಳನ್ನು ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ ಈವರೆಗೂ 36 ಅರ್ಜಿಗಳು ಸ್ವೀಕೃತವಾಗಿದ್ದು, 9 ಫಲಾನುಭವಿಗಳಿಗೆ ಬ್ಯಾಂಕಿನಿಂದ ಸಾಲ ಮಂಜೂರಾಗಿದೆ. ಉಳಿದ 6 ಅರ್ಜಿಗಳಿಗೆ ಸಾಲ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 4 ಅರ್ಜಿಗಳು ಬ್ಯಾಂಕ್‌ನಿAದ ತಿರಸ್ಕೃತಗೊಂಡಿವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 2021-22ನೇ ಸಾಲಿನಲ್ಲಿ 301694 ರೈತರ ಖಾತೆಗೆ 11842 ಲಕ್ಷ ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ರಾಜ ಸುಲೋಚನಾ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಗ್ರಾಮೀಣ ಪ್ರದೇಶದ ರಸ್ತೆ ಡಾಂಬರೀಕರಣ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅಭಿವೃದ್ಧಿಯಾದ ರಸ್ತೆಗಳ ಬಗ್ಗೆ ಮಾಹಿತಿ ಒದಗಿಸಬೇಕೆಂದರು.
ಕೇಂದ್ರ ಪುರಸ್ಕೃತ ಯೋಜನೆಯಡಿ ಶಿಕ್ಷಣ ಇಲಾಖೆಗೆ ಬಿಡುಗಡೆಯಾದ ಅನುದಾನವನ್ನು ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳನ್ನು ಹೊಸದಾಗಿ ನಿರ್ಮಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಮನೆಮನೆಗೆ ಸ್ವಚ್ಛ ನೀರು ಪೂರೈಕೆ ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಯೋಜನೆಗಾಗಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಕಾಮಗಾರಿ ಪ್ರಗತಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.
ಗ್ರಾಮೀಣ ಕುಡಿಯುವ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಕ ಇಂಜಿನಿಯರ್ ಕೆ. ಮುತ್ತಪ್ಪ ಮಾತನಾಡಿ, ಜಲ್ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದ ಮನೆಗಳಿಗೆ ನೀರೊದಗಿಸಲು ಮೊದಲ ಹಂತದಲ್ಲಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ತುಮಕೂರು ಹಾಗೂ ತುರುವೇಕೆರೆ ತಾಲ್ಲೂಕಿನ 84 ಗ್ರಾಮಗಳಲ್ಲಿ 27.35 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಂಡಿದ್ದು, ಈವರೆಗೆ 8 ಕಾಮಗಾರಿಗಳು ಪೂರ್ಣಗೊಂಡಿವೆ. 2ನೇ ಹಂತದಲ್ಲಿ ಗುಬ್ಬಿ, ಕುಣಿಗಲ್, ತಿಪಟೂರು, ತುಮಕೂರು ತಾಲ್ಲೂಕಿನ 75 ಗ್ರಾಮಗಳಲ್ಲಿ 29.02 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು, 3 ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಂತರ ಮಾತನಾಡಿದ ಸಚಿವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಕೈಗೊಳ್ಳುವ ಮುನ್ನ ನೀರಿನ ಲಭ್ಯತೆ ಹಾಗೂ ಮೂಲ, ಕೊಳವೆ ಬಾವಿಗಳು ಇರುವ/ ಇಲ್ಲದಿರುವ ಬಗ್ಗೆ ಸಮೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ತುಮಕೂರು-ರಾಯದುರ್ಗ ಮಾರ್ಗದಲ್ಲಿ ಕೈಗೊಂಡಿರುವ ರೈಲ್ವೆ ಯೋಜನೆ ಸಾಕಾರಕ್ಕಾಗಿ ಶೇ.100ರಷ್ಟು ಭೂಸ್ವಾಧೀನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಈ ಯೋಜನೆಗೆ ಸಂಬಂಧಿಸಿದಂತೆ ಹೊಸದಾಗಿ ಹೆಚ್ಚುವರಿಯಾಗಿ ಬೇಡಿಕೆ ಇಟ್ಟಿರುವ 400 ಎಕರೆ ಜಮೀನಿನ ಭೂಸ್ವಾಧೀನಕ್ಕಾಗಿ ಅಗತ್ಯವಿರುವ 50 ಕೋಟಿ ರೂ.ಗಳ ಅನುದಾನವನ್ನು ಇನ್ನೊಂದು ತಿಂಗಳೊಳಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬಹು ದಿನಗಳ ಕನಸಾದ ತುಮಕೂರು-ದಾವಣಗೆರೆ ರೈಲ್ವೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಯೋಜನೆಗೆ ಅಗತ್ಯವಿರುವ 50 ಕೋಟಿ ರೂ.ಗಳನ್ನು ಇನ್ನೊಂದು ವಾರದೊಳಗೆ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈಲ್ವೇ ಅಧಿಕಾರಿ ಜಗದೀಶ್ ಮಾತನಾಡಿ, 2016ರಲ್ಲಿ ಪ್ರಾರಂಭವಾಗಿರುವ ತುಮಕೂರು–ಅರಸೀಕೆರೆ ದ್ವಿಪಥ ರೈಲ್ವೇ ಯೋಜನೆಗಾಗಿ ತುಮಕೂರು, ಗುಬ್ಬಿ, ತುರುವೇಕೆರೆ, ತಿಪಟೂರು ಸೇರಿದಂತೆ 4 ತಾಲ್ಲೂಕುಗಳಲ್ಲಿ 29-11 ಎಕರೆ ವಿಸ್ತೀರ್ಣದಷ್ಟು ಜಮೀನನ್ನು ಹಸ್ತಾಂತರಿಸಲಾಗಿದ್ದು, ಭೂಸ್ವಾಧಿನ ಪ್ರಕ್ರಿಯೆಯು ಪೂರ್ಣಗೊಂಡಿದೆ ಎಂದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 5711 ವೈಯಕ್ತಿಕ ಗೃಹ ಶೌಚಾಲಯಗಳನ್ನು ನಿರ್ಮಿಸಲು ಗುರಿ ಹೊಂದಲಾಗಿತ್ತು. ಈ ಪೈಕಿ 4253 ವೈಯಕ್ತಿಕ ಗೃಹ ಶೌಚಾಲಯ ನಿರ್ಮಿಸಲಾಗಿದ್ದು 1428 ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ. ಅಲ್ಲದೆ 241 ಅಂಗನವಾಡಿ ಶೌಚಾಲಯ ನಿರ್ಮಾಣ ಹಾಗೂ 337 ಅಂಗನವಾಡಿ ಶೌಚಾಲಯ ದುರಸ್ತಿ ಕಾಮಗಾರಿ, 49 ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗಳು ಪೂರ್ಣಗೊಂಡಿವೆ.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 3 ಹಾಗೂ ತುಮಕೂರು ತಾಲ್ಲೂಕಿನಲ್ಲಿ 4 ಸೇರಿದಂತೆ ಒಟ್ಟು 7 ಸಮುದಾಯ ಶೌಚಾಲಯ ನಿರ್ಮಾಣದ ಗುರಿ ಹೊಂದಲಾಗಿದ್ದು, ಈ ಪೈಕಿ 4 ಶೌಚಾಲಯಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, 3 ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲೆಯ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 76, 2ನೇ ಹಂತದಲ್ಲಿ 254 ಘಟಕಗಳನ್ನು ನಿರ್ಮಿಸಲಾಗುವುದು. ಘಟಕ ಸ್ಥಾಪನೆಗೆ ಈಗಾಗಲೇ 19 ಗ್ರಾಮಪಂಚಾಯತಿಗಳಲ್ಲಿ ಸ್ವಂತ ಜಾಗವನ್ನು ಗುರುತಿಸಲಾಗಿದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ 309 ಗ್ರಾಮ ಪಂಚಾಯತಿಗಳಲ್ಲಿ ಜಾಗ ಮಂಜೂರಾಗಿದೆ. ಉಳಿದಂತೆ 2 ಗ್ರಾಮ ಪಂಚಾಯತಿಗಳಲ್ಲಿ ಜಾಗ ಮಂಜೂರಾತಿಯಾಗಬೇಕಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 519 ಹೊಸ ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಈ ಪೈಕಿ 400 ಗ್ರಾಮಗಳು ಪ್ರಾಥಮಿಕ ಹಾಗೂ 112 ಗ್ರಾಮಗಳು ಅಂತಿಮ ಅಧಿಸೂಚನೆಯಾಗಿದೆ. ಹೊಸದಾಗಿ ಗುರುತಿಸಿರುವ 519 ಕಂದಾಯ ಗ್ರಾಮಗಳ ಪೈಕಿ 2ಇ ತಿದ್ದುಪಡಿ ಅಧಿಸೂಚನೆಯನ್ವಯ ಖಾಸಗಿ ಜಮೀನಿನಲ್ಲಿರುವ ಜನವಸತಿ ಪ್ರದೇಶಗಳನ್ನು ಸರ್ಕಾರದ ವಶಕ್ಕೆ ಪಡೆದು ಈಗಾಗಲೇ ಪ್ರಾಥಮಿಕ ಅಧಿಸೂಚನೆಯಾಗಿರುವ ಕಂದಾಯ ಗ್ರಾಮಗಳನ್ನು ಮತ್ತೊಮ್ಮೆ ಸರ್ವೇ ಮಾಡಿ 128 ಗ್ರಾಮಗಳನ್ನು ಗುರುತಿಸಿ ಈ ಪೈಕಿ 18 ಗ್ರಾಮಗಳನ್ನು ಪ್ರಾಥಮಿಕ ಅಧಿಸೂಚನೆ ಹಾಗೂ 16 ಗ್ರಾಮಗಳನ್ನು ಅಂತಿಮ ಅಧಿಸೂಚನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker