
ತುಮಕೂರು : ಅಮಲಾಪುರ ಗ್ರಾಮದ ಸರ್ವೆ ನಂ. 31ರಲ್ಲಿ ಪರಿಶಿಷ್ಟ ಜಾತಿಯ ಹಂದಿಜೋಗಿ ಅಲೆಮಾರಿ ಜನಾಂಗದವರಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸುವ ಸಂಬಂಧ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳ ಪರಿಶೀಲನೆ ವೇಳೆ ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಕಾಮಗಾರಿ ತಕ್ಷಣ ಪ್ರಾರಂಭಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಲೇಔಟ್ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಪಹಣಿ ದಾಖಲೆ ಸಿದ್ಧಪಡಿಸಿ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಯೋಜನೆಯಡಿ ಈಗಾಗಲೇ 19 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಸುಮಾರು 30 ನಿವೇಶನಗಳನ್ನು ಅಭಿವೃದ್ಧಿಪಡಿಸಲು ಅವಕಾಶವಿದೆ. ನಿವೇಶನಗಳ ಲೇಔಟ್ ನಿರ್ಮಾಣ ಹಾಗೂ ಜಾಗ ಸಮತಟ್ಟುಗೊಳಿಸುವ ಕಾಮಗಾರಿಗಾಗಿ ₹18 ಲಕ್ಷ ಅನುದಾನ ಮಂಜೂರಾಗಿರುವುದಾಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದರು.
ಜಿಲ್ಲಾಧಿಕಾರಿಗಳು ಜಾಗವನ್ನು ಶೀಘ್ರವಾಗಿ ಸಮತಟ್ಟುಗೊಳಿಸಲು ಜೆಸಿಬಿ ಸೇರಿದಂತೆ ಅಗತ್ಯ ಯಂತ್ರೋಪಕರಣಗಳ ಸಂಖ್ಯೆಯನ್ನು ಹೆಚ್ಚಿಸಿ ತಕ್ಷಣ ಲೆವೆಲಿಂಗ್ ಕಾರ್ಯ ಆರಂಭಿಸುವಂತೆ ಸೂಚಿಸಿದರು. ಲೇಔಟ್ ಕಾಮಗಾರಿಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಿ, ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ತ್ವರಿತವಾಗಿ ವಿತರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಮಗಾರಿ ಅನುಷ್ಠಾನಾಧಿಕಾರಿಗಳಾದ ಕೆಆರ್ಐಡಿಎಲ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪರಿಶಿಷ್ಟ ಜಾತಿಯ ಹಂದಿಜೋಗಿ ಅಲೆಮಾರಿ ಜನಾಂಗದ ಜನರಿಗೆ ಶಾಶ್ವತ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ಯೋಜನೆಯನ್ನು ಆದ್ಯತೆಯ ಮೇರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಶ್ರೀಮತಿ ಸೋನಿಯಾ ವರ್ಣಿಕರ್, ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.



